ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ತುಂತುರು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಫೆ.25 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು. ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿ ಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು ಜಿಲ್ಲೆಗಳು ಸೇರಿದಂತೆ ದಕ್ಷಿಣದ ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರಿನಲ್ಲಿ ಗುಡುಗು-ಸಿಡಿಲು ಸಹಿತ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅದೇ ರೀತಿ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

