ಮಂಗಳೂರು : ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದ ಆರೋಪಿಗೆ ಮಂಗಳೂರಿನ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಅವರು ಏಪ್ರಿಲ್ 10, 2026ರಂದು ಆರೋಪಿಯಾಗಿರುವ ಚಾರ್ಮಾಡಿ ನಿವಾಸಿ ಟಿ.ಇ. ಜೋಸೆಫ್ (42) ಅವರನ್ನು ದೋಷಿ ಎಂದು ತೀರ್ಪು ನೀಡಿದರು. ಬಳಿಕ ಏಪ್ರಿಲ್ 16ರಂದು ಶಿಕ್ಷೆ ಪ್ರಕಟಿಸಲಾಯಿತು.
ನ್ಯಾಯಾಲಯವು ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 8(c) r/w 20(b)(ii)(B) ಅಡಿಯಲ್ಲಿ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಇದೇ ವೇಳೆ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಕಠಿಣ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.
ಈ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ. ಸುಬ್ಬಾಪುರ್ ಮಠ್ ಅವರು ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.


